ಅಂದಿಂದ ನಾ ನಿನ್ನ ನೆರೆ ನಂಬಿದೆನೊ ಕೃಷ್ಣ
|| ಪ ||
ತಂದೆ ಗೋವಿಂದ ಮುಕುಂದನ ನಂದನ ಕಂದ || ಅ.ಪ ||
ಬಲವಂತನುತ್ತಾನಪಾದರಾಯನ ಕಂದ
ಬಲತಾಯಿ ನೂಕಲು ಅಡವಿಯೊಳು
ಜಲಜಾಕ್ಷ ನಿನ್ನ ಕುರಿತು ತಪವಿರಲಾಗಿ
ಒಲಿದು ಧ್ರುವಗೆ ಪಟ್ಟಗಟ್ಟಿದ್ದು ಕೇಳಿ
|| ೧ ||
ನಕ್ರಂಗೆ ಗಜರಾಜ ಸಿಕ್ಕು ಸರಸಿಯೊಳು
ದುಃಖದಿ ಶ್ರೀಹರಿಯೆ ಸಲಹೆನ್ನಲು
ಚಕ್ರದಿ ನೆಗಳ ಕಂಠವ ತರಿದು ಭಕ್ತನ
ವಕ್ರದಿ ಪರಿದಾದಿಮೂಲನೆಂಬುದ ಕೇಳಿ
|| ೨ ||
ದ್ರುಪದನ ಸುತೆಯ ದುಶ್ಯಾಸನ ಸಭೆಯೊಳು
ಕಪಟದಿ ಸೀರೆಯ ಸೆಳೆಯುತಿರೆ
ಸುಪರ್ಣವಾಹನ ಕೃಷ್ಣ ಸಲಹೆಂದ ಅಬಲೆಯ
ಅಪಮಾನದಿಂ ಕಾಯ್ದ ಶ್ರೀಹರಿಯೆಂಬುದ ಕೇಳಿ
|| ೩ ||
ಹರಿನಾರಾಯಣನೆಂದು ನಾರದ ಒರೆಯಲು
ದುರುಳ ದಾನವನೊಳು ಮುನಿದು
ಕರೆ ನಿನ್ನ ಒಡೆಯನ ಎಂದು ಗರ್ಜಿಸೆ ನರ-
ಹರಿ ಬಂದು ಒಡನೆಯೆ ಕಾಯ್ದನೆಂಬುದ ಕೇಳಿ
|| ೪ ||
ಅಂಬರೀಷಗೆ ದೂರ್ವಾಸ ಶಾಪವ ಕೊಡೆ
ಅಂಬುಜಲೋಚನ ಚಕ್ರದಿಂದ
ಬೆಂಬತ್ತಿ ಮುನಿಯ ಶಾಪವ ಪತಿಹರಿಸಿದ
ಕಂಬು ಚಕ್ರಧರ ಹರಿಯೆಂಬುದ ಕೇಳಿ
|| ೫ ||
ಛಲ ಬೇಡ ರಾಮನ ಲಲನೆಯ ಬಿಡುಯೆಂದು
ತಲೆ ಹತ್ತರವಗೆ ಪೇಳುಲು ತಮ್ಮನ
ಬಳಲಿಸಿ ಹೊರಡಿಸುವ ನಿನ್ನ ಮೊರೆ ಹೊಗೆ
ಸಲೆ ವಿಭೀಷಣಗೆ ಲಂಕೆಯನ್ನಿತ್ತುದ ಕೇಳಿ
|| ೬ ||
ಸುರನರ ನಾಗಲೋಕದ ಭಕ್ತ ಜನರನ್ನು
ಪೊರೆಯಲೋಸುಗ ವೈಕುಂಠದಿಂದ
ಸಿರಿಸಹಿತಲೆ ಬಂದು ಶೇಷಾಚಲದಿ ನಿಂತ
ಪುರಂದರವಿಠಲ ನಿನ್ನಯ ಚರಣವ ಕಂಡು
|| ೭ ||
ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು
No comments:
Post a Comment